19/08/2021
ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಒಮ್ಮೆ ದುರ್ವಾಸಮಹರ್ಷಿಗಳ ಶಾಪದಿಂದ ಇಂದ್ರನು ರಾಜ್ಯಭ್ರಷ್ಟನಾಗಲು, ಸ್ವರ್ಗಲಕ್ಷ್ಮಿಯೂ ಸಹ ಸ್ವರ್ಗವನ್ನು ಬಿಟ್ಟು ವೈಕುಂಠವನ್ನು ಸೇರಿದಳು. ಆಗ ಪರಮದುಃಖಾಕ್ರಾಂತರಾದ ದೇವತೆಗಳೆಲ್ಲರೂ ಚತುರ್ಮುಖಬ್ರಹ್ಮನನ್ನು ಮುಂದಿಟ್ಟುಕೊಂಡು(ಪುರಸ್ಕರಿಸಿ), ವೈಕುಂಠದಲ್ಲಿ ಪರಮಾತ್ಮನನ್ನು ಶರಣುಹೊಂದಿದರು. ಪರಮದಯಾಳುವಾದ ವಿಷ್ಣುವಿನ ಆಜ್ಞೆಯಂತೆ ದೇವತೆಗಳು ದಾನವರೊಡನೆ ಅಮೃತಕ್ಕಾಗಿ ಕ್ಷೀರಸಮುದ್ರವನ್ನು ಮಥಿಸಲು, ಮಹೇಂದ್ರನ ಸಂಪತ್ಸ್ವರೂಪಿಣಿಯಾದ ಮಹಾಲಕ್ಷ್ಮಿಯು ಅಲ್ಲಿ ಆವಿರ್ಭವಿಸಿ, ದೇವತೆಗಳಿಗೆ ವರವನ್ನು ಅನುಗ್ರಹಿಸಿದಳು ಹಾಗೂ ಮಹಾವಿಷ್ಣುವಿನ ಪಾಣಿಗ್ರಹಣ ಮಾಡಿದಳು(ವಿವಾಹವಾದಳು).
ನಿತ್ಯ ಶುದ್ಧ-ಬುದ್ಧ-ಮುಕ್ತಸ್ವರೂಪಳೂ,ನಿತ್ಯಸಿದ್ಧಳೂ ಆದ ಈ ಮಂಗಲದೇವತೆಯ ಮಹಿಮೆಯನ್ನು ವರ್ಣಿಸುವ ಶಾಸ್ತ್ರಗಳಲ್ಲೇ ಆಕೆಯನ್ನು ಕ್ಷೀರಸಮುದ್ರಸಂಭವೆ, ಸಮುದ್ರರಾಜನ ಪುತ್ರಿ, ಚಂದ್ರನ ತಂಗಿ, ಯಜ್ಞಕುಂಡದಲ್ಲಿ ಉದ್ಭವವಾದವಳು, ಕಮಲದಲ್ಲಿ ಆವಿರ್ಭವಿಸಿದವಳು-ಇತ್ಯಾದಿ ಅಭಿಪ್ರಾಯಗಳನ್ನು ಕಾಣುತ್ತೇವೆ
ವ್ರತ
"ಶುಕ್ಲೇ ಶ್ರಾವಣಿಕೇ ಮಾಸೇ ಪೂರ್ಣಿಮೋಪಾಂತ್ಯಭಾಗವೇ|
ವರಲಕ್ಷ್ಮ್ಯಾ ವ್ರತಂ ಕಾರ್ಯಂ ಸರ್ವಸಿದ್ಧಿಪ್ರದಾಯಕಮ್(ಸರ್ವಮಾಂಗಲ್ಯಸಿದ್ಧಯೇ)||"
ನಿಜಶ್ರಾವಣ ಶುಕ್ಲಪೂರ್ಣಿಮೆ ದಿವಸ ಶುಕ್ರಗ್ರಹವು ಪೂರ್ವದಲ್ಲಿ ಬೆಳಗುತ್ತಿರುವ ಸಮಯದಲ್ಲಿ, ಅರ್ಥಾತ್ ಶುಕ್ರವಾರ, ಅಥವಾ ಶುಕ್ಲಪೂರ್ಣಿಮೆಯ ಅತಿಹತ್ತಿರದ ಶುಕ್ರವಾರದಂದು, ವರಲಕ್ಷ್ಮೀ ಆರಾಧನೆ ಮಾಡಬೇಕು ಎಂಬ ಶಾಸ್ತ್ರವಿಧಿ ಇದೆ. ಕಾರಣಾಂತರಗಳಿಂದ ಆ ದಿನದಂದು ವ್ರತವನ್ನು ಮಾಡಲಾಗದಿದ್ದವರು ನವರಾತ್ರಿಯ ಶುಕ್ರವಾರದಂದು ಮಾಡಬಹುದು.
ವ್ರತ ಆಚರಿಸುವ ವಿಧಾನ
ಶುಕ್ರವಾರದ ದಿನ, ಸಾಯಂಕಾಲದವರೆವಿಗೂ ಉಪವಾಸ ಇರಬೇಕು. ವ್ರತ ಮಾಡುವವರು ಸಂಕಲ್ಪ ಮಾಡಿ ದೇವಿಯನ್ನು ಕಲಶ ಮತ್ತು ವಿಗ್ರಹಗಳಲ್ಲಿ ಆವಾಹನೆ ಮಾಡಿ ಪೂಜಿಸುವರು. ಕಲಶದಲ್ಲಿ ಅಕ್ಕಿ ತುಂಬಿಸಿ ಖರ್ಜೂರ, ಗೋಡಂಬಿ,ದ್ರಾಕ್ಷಿ, ಬಾದಾಮಿ, ಕಲ್ಲುಸಕ್ಕರೆ ಮತ್ತು ಕೆಲವು ಹಣ್ಣುಗಳನ್ನು ಇರಿಸುವರು. ಈ ಕಳಸಕ್ಕೆ ಲಕ್ಷ್ಮೀ ಕಳಸ ಎನ್ನುತ್ತಾರೆ.
ಅದರ ಮೇಲೆ ಚಿನ್ನ ಅಥವಾ ಬೆಳ್ಳಿಯಿಂದ ತಯಾರಿಸಿದ ಮುಖವಾಡವನ್ನಿಟ್ಟು ಅಥವಾ ತೆಂಗಿನಕಾಯಿಗೆ ಹಳದಿಯ ಹಿಟ್ಟಿನಿಂದ ಮೂಗು ಕಣ್ಣು ಕಿವಿ ಮಾಡಿ, ಒಡವೆಗಳನ್ನು ಏರಿಸಿ, ಸೀರೆ ಉಡಿಸಿ, ಅಲಂಕಾರ ಮಾಡಲಾಗುತ್ತದೆ. ಈ ಪೂಜೆಯಲ್ಲಿ ವಿಶೇಷವಾದ ದಾರಗಳಿಗೆ ಪೂಜೆಯನ್ನು ಸಲ್ಲಿಸುವರು. ಈ ದಾರವನ್ನು ದೋರವೆಂದು ಕರೆವರು. ಹೊಸದಾದ ೧೨ ದಾರಗಳಿಗೆ ೧೨ ಗಂಟುಗಳನ್ನು ಹಾಕಿ, ಅದನ್ನು ಸ್ವಲ್ಪ ನೀರಿನಲ್ಲಿ ನೆನೆಸಿ ಅರಿಶಿನ ಹಚ್ಚಿ ದೇವಿಯ ಪಕ್ಕದಲ್ಲಿರಿಸಿ ಆರಾಧಿಸಿ ಪೂಜಿಸುವರು.
ಈ ದಾರಗಳಿಗೆ ಅರಿಶಿನ, ಕುಂಕುಮ, ಹೂವು, ಪತ್ರೆಗಳಿಂದ ಪೂಜಿಸಿ, ನೈವೇದ್ಯ ಮಾಡುವರು. ಹನ್ನೆರಡು ಹೆಸರುಗಳನ್ನು ಉಚ್ಚರಿಸಿ ದ್ವಾದಶನಾಮಾವಳಿಯೆಂದು ಪೂಜಿಸುವರು. ಆ ನಾಮಾವಳಿಗಳು ಹೀಗಿವೆ -ರಮೆ, ಸರ್ವಮಂಗಳೆ, ಕಮಲವಾಸಿನೆ, ಮನ್ಮಥಜನನಿ, ವಿಷ್ಣುವಲ್ಲಭೆ, ಕ್ಷೀರಾಬ್ಧಿಕನ್ಯಕೆ, ಲೋಕಮಾತೆ, ಭಾರ್ಗವಿ, ಪದ್ಮಹಸ್ತೆ, ಪುಷ್ಪೆ, ತುಷ್ಟೆ ಮತ್ತು ವರಲಕ್ಷ್ಮಿ. ಈ ದಾರಕ್ಕಾಗಿ ವಿಶೇಷವಾದ ನೈವೇದ್ಯವಾದ ಸಜ್ಜಪ್ಪವನ್ನು ಅರ್ಪಿಸುವರು. ಅಂದು ಶ್ರೀಸೂಕ್ತವನ್ನು ಪಠಿಸುವುದೂ ಒಳ್ಳೆಯದು.
ದೇವಿಯ ಮೂರ್ತಿಗೂ ಅರಿಶಿನ, ಕುಂಕುಮ,ಹೂವು, ಪತ್ರೆ ಮತ್ತು ಅಕ್ಷತೆಯಿಂದ ಪೂಜೆಯನ್ನು ಸಲ್ಲಿಸಿದ ಬಳಿಕ, ಪೂಜಿಸಿದ ಹೆಣ್ಣುಮಕ್ಕಳು ಆ ದಾರಗಳಿಗೆ ಹೂವನ್ನು ಕಟ್ಟಿ, ಹಿರಿಯರಿಂದ ಕಂಕಣದಂತೆ ಬಲಗೈಗೆ ಕಟ್ಟಿಸಿಕೊಳ್ಳುವರು. ಹಾಗೆ ಕಟ್ಟಿಸಿಕೊಂಡ ನಂತರ ಆ ಹಿರಿಯರಿಗೆ ನಮಸ್ಕರಿಸಿ ದಕ್ಷಿಣೆಯೊಂದಿಗೆ ದಾನವನ್ನು ಕೊಡುವರು. ಈ ಸಮಯದಲ್ಲಿ ಹೇಳುವ ಶ್ಲೋಕ ಹೀಗಿದೆ.
"ದ್ವಾದಶಗ್ರಂಥಿ ಸಂಯುಕ್ತಂ ಕೃತಂ ದ್ವಾದಶತಂತುಭಿ:
ಧಾರಯಾಮಿ ಮಹಾದೇವಿ ಸೂತ್ರಂ ತೇ ಸರ್ವಮಂಗಳೇ"